ಬೆಂಗಳೂರು, ಜುಲೈ 2: 2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ. ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಅನ್ವಯ, ಆಯ್ಕೆಯಾಗಿದ್ದ 481 ಅಭ್ಯರ್ಥಿಗಳ ಪೈಕಿ ನೇಮಕಾತಿ ಆದೇಶ ಪಡೆದಿರುವ 341 ಅಭ್ಯರ್ಥಿಗಳಿಗೆ ಷರತ್ತುಬದ್ಧವಾಗಿ ಕರ್ತವ್ಯಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ.
ಈ ಪ್ರಕರಣದಲ್ಲಿ 2023ರ ಮಾರ್ಚ್ 8ರಂದು ಪ್ರಕಟವಾಗಿದ್ದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿದ್ದ, ತಂದೆಯ ಆದಾಯದ ಆಧಾರದ ಮೇಲೆ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಸಲ್ಲಿಸಿದ್ದ ಇತರೆ ಹಿಂದುಳಿದ ವರ್ಗಗಳ (OBC) ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 481 ಅಭ್ಯರ್ಥಿಗಳ ಕೌನ್ಸಿಲಿಂಗ್ ತಡೆಹಿಡಿಯಲಾಗಿತ್ತು. ಬಳಿಕ ಈ ವಿಚಾರವು ಆಡಳಿತ ನ್ಯಾಯಮಂಡಳಿ, ಸರ್ವೋಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದವರೆಗೆ ತಲುಪಿತ್ತು.
ದಿನಾಂಕ 24-06-2026ರಂದು ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ, ನೇಮಕಾತಿ ಆದೇಶ ಪಡೆದಿರುವ 341 ಅಭ್ಯರ್ಥಿಗಳಿಗೆ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಆದರೆ ಈ ನೇಮಕಾತಿಯು ನ್ಯಾಯಾಲಯದಲ್ಲಿ ಬಾಕಿ ಇರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಇದೇ ವೇಳೆ, ತಡೆಹಿಡಿಯಲಾದ 481 ಅಭ್ಯರ್ಥಿಗಳಲ್ಲಿ ಉಳಿದ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಹೊಸ ನೇಮಕಾತಿ ಆದೇಶವನ್ನು ಸೃಜಿಸಬಾರದು ಅಥವಾ ವಿತರಿಸಬಾರದು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಈ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಸೇರಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.







